ಬೆಂಗಳೂರು: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ತೀರ್ಪು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ಕಣ್ಣೀರೊರೆಸುತ್ತಾ ಕೋರ್ಟ್ ಹಾಲ್ನಿಂದ ನಿರ್ಗಮಿಸಿದ ಪ್ರಜ್ವಲ್ ರೇವಣ್ಣ
ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟರು. ಕಣ್ಣೀರು ಒರೆಸುತ್ತಲೇ ಪ್ರಜ್ವಲ್ ರೇವಣ್ಣ ಅಲ್ಲಿಂದ ತೆರಳಿದರು.